ಭಾನುವಾರ, ಸೆಪ್ಟೆಂಬರ್ 7, 2014

ಹಿಂಸೆ


ಹಿಂಸೆಯೆಂಬುದು ಕುಣಿಯುತಲಿತ್ತು
ನಿದ್ದೆಯ ಕಾಣದೆ ಚಡಪಡಿಸಿತ್ತು |
ಯಾರನು ಕೊಲ್ಲಲಿ ಯಾರನು ಕೆಡವಲಿ
ಯಾರನು ಚುಚ್ಚಲಿ ಯಾರನು ತಿವಿಯಲಿ ||

ಬಂಧು ಬಳಗ ಗೆಳೆಯರು ಎನ್ನದೆ
ಸಿಟ್ಟಿನ ಭರದಲಿ ಅಬ್ಬರಿಸಿತ್ತು |
ರೋಷವು ಉಕ್ಕಿದೆ ಹಲ್ಲದು ಕಡಿದಿದೆ
ಯಾರನು ಹೊಡೆಯಲಿ ಯಾರನು ಬಡಿಯಲಿ ||

ಸ್ಥಾನ ಮಾನದ ಗಣನೆಯೆ ಇಲ್ಲ
ಸ್ವಂತ ನಾಶದ ಭಯವೆ ಇಲ್ಲ |
ನ್ಯಾಯವು ಎಲ್ಲಿದೆ ಧರ್ಮವು ಎಲ್ಲಿದೆ
ಸುತ್ತಲು ಮುಸುಕಿದೆ ಕತ್ತಲೆ ಎಲ್ಲ ||

ಸಿಟ್ಟದು ತಣಿಯಲು ಕಾಣುವುದೇನು
ರೋದನ ನೋವು ಮಾಡುವುದೇನು |
ಕೋಪದ ಭರದಲಿ ಕೊಯ್ದಿಹ ಮೂಗು
ಶಾಂತವಾಗಲು ಮರಳುವುದೇನು? ||

ಹಿಂಸೆಯೆಂಬುದು ಹೀನರ ಶಸ್ತ್ರವು
ಮತಿಯನು ಮರೆಸಿ ನಾಶವ ತರುವುದು |
ನಿದ್ದೆಯು ಬರದು ಬುದ್ಧಿಯು ಇರದು
ಕಳವಳ ಕಾಡಲು ನೆಮ್ಮದಿ ಸಿಗದು ||

ಕೋಪದ ಕೂಪದಿ ಕತ್ತಲ ಗುಹೆಯಲಿ
ಚಿಗುರುವ ಹಿಂಸೆಗೆ ಸೊರಗದೆ ಬಾಳು |
ಹಿಂಸೆಯು ಅಡಗಲಿ ಶಾಂತಿಯು ನೆಲೆಸಲಿ
ದ್ವೇಷವು ಕಮರಲಿ ಪ್ರೀತಿಯು ಅರಳಲಿ |

-ಕ.ವೆಂ.ನಾಗರಾಜ್.